Month: ಫೆಬ್ರವರಿ 2010
* ಭಾವೀ ವರರೇ, ಎಚ್ಚರ!
* “ಒಹ್, ಇದ್ ನಂಬಳ ಪೊಣ್ಣ್”
* ಹಳೇ ಸೇತುವೆ.. ಹಳೇ ನೆನಪು, ಹೊಸ ಭರವಸೆ
ಹಳೇ ಸೇತುವೆಗೆ ತುಂಬಿತು ನೂರು. ನೂರು ಎಂದರೆ ಸೇತುವೆಗೆ ನೂರು ವರ್ಷ ತುಂಬಿತು ಎಂದಲ್ಲ. ನಾನು ಆರಂಭಿಸಿದ “ಹಳೇ ಸೇತುವೆ” ಹೆಸರಿನ ಬ್ಲಾಗ್ ಗೆ ೧೦೦ ಪೋಸ್ಟ್ಗಳು ತುಂಬಿ ಕೊಂಡವು.
ಈ ಬ್ಲಾಗ್ ಆರಂಭಿಸುವಾಗ ನನಗನ್ನಿಸಿರಲಿಲ್ಲ ಇಷ್ಟು ದೂರ ಬರುವೆ ಎಂದು ಏಕೆಂದರೆ ನಾನು ನುರಿತ ಬರಹಗಾರನೇನೂ ಅಲ್ಲ. ಪತ್ರಿಕೋದ್ಯಮದ ವಿದ್ಯಾರ್ಥಿಯೂ ಅಲ್ಲ, ಬರಹಗಾರರ ಗೆಳೆತನವೂ ಇಲ್ಲ. ಒಂದೆರಡು ಆನ್ ಲೈನ್ ಪತ್ರಿಕೆಗಳಲ್ಲಿ ಅಭಿಪ್ರಾಯ ಬರೆದು ಬರೆಯುವ ಧೈರ್ಯ ನನಗೆ ನಾನೇ ತಂದುಕೊಂಡೆ.
ಬ್ಲಾಗ್ ಆರಂಭಿಸುವ ಬಗ್ಗೆ ಕೆಲವು ಲೇಖನಗಳನ್ನು ಓದಿದ ನಂತರ ನನಗೂ ನನ್ನದೇ ಆದ ಒಂದು ಬ್ಲಾಗ್ ಆರಂಭಿಸಿಕೊಳ್ಳುವ ಆಸಕ್ತಿ ಮೂಡಿತು. ಅದರಲ್ಲೂ ಪುಕ್ಕಟೆಯಾಗಿ ಬ್ಲಾಗ್ ರಚಿಸಿಕೊಳ್ಳಬಹುದು ಎಂದ ಮೇಲಂತೂ ಕೇಳಬೇಕೆ? ಪುಕ್ಕಟೆ ಸಿಕ್ಕರೆ ಯಾರಿಗೆ ಬೇಡ? ನಾನು ಹೈಸ್ಕೂಲಿನಲ್ಲಿದ್ದಾಗ ಕನ್ನಡ ಪಂಡಿತರೊಬ್ಬರು ಹೇಳಿದ್ದು ನೆನಪಿಗೆ ಬಂತು. ಪುಕ್ಕಟೆ ಯಾಗಿ ಹೆಣ್ಣು ಸಿಕ್ಕರೆ ನನಗೊಂದು,ನಮ್ಮಪ್ಪನಿಗೊಂದು, ನಮ್ಮಜ್ಜನಿಗೊಂದಂತೆ. ಅದೇ ಸಮಯ ಅದಕ್ಕೆ ಒಂದಿಷ್ಟು ಕಾಸು ತಗಲುತ್ತದೆ ಅಂದಾಕ್ಷಣ ನನಗಿನ್ನೂ ಎಳೇ ಪ್ರಾಯ, ನಮ್ಮಪ್ಪನಿಗೊಂದು ಹೆಣ್ಣೀಗಾಗಲೇ ಇದೆ, ನಮ್ಮಜ್ಜನಿಗೆ ವಯಸ್ಸಾಯಿತು ಎಂದು ಜಾರಿಕೊಳ್ಳುತ್ತಾರಂತೆ.
ಬ್ಲಾಗ್ ಗೆ ಹಳೇ ಸೇತುವೆ ಎಂದು ಹೆಸರಿಟ್ಟಾಗ ನನ್ನ ಸೋದರಿಯರು ಕೇಳಿದರು ಯಾಕೀ ಹೆಸರೆಂದು. ಈ ಸೇತುವೆ ತೋರಿಸಿ ಹೊಳೆಯಿಂದಾಚೆಯಿಂದ ಸೈತಾನ್ ಬರುತ್ತಾನೆ ಎಂದು ನನ್ನ ಚಿಕ್ಕಮ್ಮಂದಿರು ನಾನು ಚಿಕ್ಕವನಿದ್ದಾಗ ಹೆದರಿಸುತ್ತಿದ್ದರು. ಈ ಸೇತುವೆ ದಾಟಿ ಕೊಂಡೇ ನನ್ನ ಆಪ್ತ ಮಿತ್ರರನ್ನು ಭೆಟ್ಟಿಯಾಗಲು ನಾನು ಹೋಗುತ್ತಿದ್ದದ್ದು. ನನ್ನ ಪ್ರೀತಿಯ ತಮ್ಮ ಆಕಸ್ಮಿಕವಾಗಿ ನದಿಯಲ್ಲಿ ಜಾರಿ ಬಿದ್ದು ನಿಧನ ಹೊಡಿದ ನಂತರ ಅವನ ಅಂತಿಮ ಯಾತ್ರೆ ಸಹಾ ಇದೇ ಸೇತುವೆ ಮೇಲೇ ಹಾದು ಹೋಗಿದ್ದು. ಹಾಗಾಗಿ ಈ ಸೇತುವೆ ನನ್ನನ್ನು ಭಾವುಕನನ್ನಾಗಿ ಮಾಡುತ್ತದೆ. ಹಳೇ ನೆನಪುಗಳನ್ನು ನನಗೆ ತಲುಪಿಸುತ್ತದೆ. ಈ ಕಾರಣಗಳಿಗಾಗಿ ಹಳೇ ಸೇತುವೆ ಹಸರು ಆಪ್ತವಾಗಿ, ಪ್ರಸಕ್ತವಾಗಿ ಕಂಡಿತು.
ಕನ್ನಡ ನಾಡಿನಿಂದ ಹೆಚ್ಚು ಕಡಿಮೆ ಇಪ್ಪತ್ತು ವರ್ಷ ಹೊರಗಿದ್ದುದರಿಂದ ನಾಡಿನೊಂದಿಗೆ ಮಾತ್ರವಲ್ಲ ನುಡಿಯೊಂದಿಗೂ ನಂಟು ಬಿಟ್ಟು ಹೋಗಿತ್ತು. ಆದರೆ ಮಾತೃ ಭಾಷೆ ನೀವೆಲ್ಲೇ ಇದ್ದರೂ ನಿಮ್ಮ ಬೆನ್ನು ಬಿಡದು. ಮಾತೃ ಭಾಷೆಯ ಮೋಡಿ ಇಲ್ಲಿದೆ ನೋಡಿ. ವ್ಯಕ್ತಿ ಏನೆಲ್ಲವನ್ನು ಕಳೆದುಕೊಂಡರೂ ಅವನ ಅಂತರಂಗದ ಭಾಷೆ ಅವನ ಉಸಿರಿನಂತೆ ಅವನೊಂದಿಗೆ ಇರುತ್ತದೆ. ಕೆಲವರು ಡ್ರಾಮ ಮಾಡಬಹುದು ದೇಶದ ಹೊರಗೆ ಇರುವುದರಿಂದ ಭಾಷೆ ಮರೆತು ಹೋಯಿತು ಎಂದು. ಅದು ಶುದ್ಧ, ಸೋಗಲಾಡಿತನ. ನಾವು ಮನೆಯಲ್ಲಿ ಬೇರೆ ಭಾಷೆ ಮಾತನಾಡಿದರೂ ನನ್ನ ಮನದ, ಮೆಚ್ಚಿನ ನುಡಿ ಕನ್ನಡ. ಭೂಮಿ ತಾಯಿ ಇರುವಾ ತನಕ ನಗುತಾ ಇರಲಿ ಕನ್ನಡ ಎಂದಂತೆ ನನ್ನ ಮನದಲ್ಲಿ ಕನ್ನಡಕ್ಕೆ ವಿಶೇಷ ಸ್ಥಾನ ಎಂದಿಗೂ ಇರುತ್ತದೆ.
ಮನುಷ್ಯ ಸಂಬಂಧಗಳ ಥರ ಶಿಥಿಲವಾಗುತ್ತಿರುವ, ಸುಣ್ಣದ ಕಲ್ಲಿನಿಂದ ಕಟ್ಟಿದ, ಭದ್ರೆಯ ಆಪ್ತ ಮಿತ್ರ ಹಳೇ ಸೇತುವೆ ಜಾಗದಲ್ಲಿ ಮತ್ತೊಂದು ಸೇತುವೆ ಬಂದರೂ ಅಂತರ್ಜಾಲದಲ್ಲಿ ಹಳೇ ಸೇತುವೆ ಹೆಸರು ಖಾಯಮ್ಮಾಗಿ ಉಳಿಯುವಂತೆ ನನ್ನ ಬ್ಲಾಗ್ ಸಹಾಯ ಮಾಡಬಲ್ಲುದು ಎಂದು ನನ್ನ ನಂಬಿಕೆ.
ನನ್ನ ಬರವಣಿಗೆಯ ನಿಟ್ಟಿನಲ್ಲಿ ಸಂಪದದಿಂದ ಸಿಕ್ಕ ಸಹಾಯಕ್ಕೆ ನಾನೆಂದೂ ಋಣಿ. ಅದೇ ರೀತಿ google transliteration ಬಳಸುವ ನನಗೆ ಗೂಗಲ್ ನ ಈ ಸೌಲಭ್ಯ ಬಹಳ ಸಹಾಯಕವಾಯಿತು.
* ವಿಷ ಕನ್ಯೆ
* “ಪಿಂಕ್ ಟ್ರಕ್ಕು”
“ಮಾತೃ ದೆವ್ವೋ ಭವ”
ಮಾತೃ ದೇವೋಭವ ಎಂದು ತಾಯಿಯನ್ನು ಪೂಜಿಸಿ ಗೌರವಿಸು ಎಂದು ಹಿಂದೂ ಸಂಸ್ಕೃತಿ ಉತ್ತೇಜಿಸಿದರೆ, ಮಾತೆಯ ಕಾಲಿನಡಿಯಲ್ಲಿ ಸ್ವರ್ಗವಿದೆ, ಆಕೆಯನ್ನು ಸರಿಯಾಗಿ ನಡೆಸಿಕೊ ಎನ್ನುವ ಇಸ್ಲಾಂ ಧರ್ಮದ ನುಡಿ. ತಾಯಿ ತನಗೆ ಬೆಂಬಿಡದೆ ಒಂದೇ ಸಮನೆ ಫೋನ್ ಮಾಡುತ್ತಿರುತ್ತಾಳೆ ಎಂದು ಪುತ್ರ ಮಹಾಶಯ ನ್ಯಾಯಾಲಯದ ಕಟ್ಟೆ ಹತ್ತಿದ. ಆಸ್ಟ್ರಿಯಾದ ೭೩ ವರ್ಷದ ಈ ವೃದ್ಧ ಮಾತೆ ದಿನಕ್ಕೆ ೪೯ ಸಲ ಫೋನ್ ಮಾಡಿ ಪೀಡಿಸುತ್ತಿದ್ದಳಂತೆ ಒಂಭತ್ತು ತಿಂಗಳು ಹೊತ್ತೂ, ಹೆತ್ತೂ ಸಾಕಿದ ಮಗನನ್ನು. ನ್ಯಾಯಾಲಯ ಆಕೆಯಿಂದ ವಿವರಣೆ ಕೇಳಿದಾಗ ಆಕೆ ಹೇಳಿದ್ದು, ನನಗೆ ಅವನೊಂದಿಗೆ ಮಾತನಾಡಬೇಕಿತ್ತು ಅಷ್ಟೇ ಎಂದು. ಮುಂದುವರೆದು, ನನ್ನ ಮಗನ ಹತ್ತಿರವೋ, ಮಗಳ ಹತ್ತಿರವೋ ಮಾತನಾಡುವಂತಿಲ್ಲ, ನನ್ನ ೧೫ ವರುಷದ ಮೊಮ್ಮಗುವನ್ನು ಇದುವರೆಗೂ ನಾನು ನೋಡಿಯೇ ಇಲ್ಲ ಎಂದು ತನ್ನ ಅಳಲನ್ನು ತೋಡಿಕೊಂಡಳು ಆ ಮಹಾತಾಯಿ.
ತನಗೆ ಅದು ಬೇಕು ಇದು ಬೇಕು ಪೀಡಿಸದೇ ತನ್ನ ಮಗನೊಂದಿಗೆ ಮಾತನಾಡಲು ಶ್ರಮಿಸುವುದೇ ಆ ತಾಯಿ ಮಾಡಿದ ಮಹಾಪರಾಧ. ನೋಡಿ ನಮ್ಮ ಸಂಸ್ಕೃತಿಗೂ, ಸಂಪತ್ತಿನ ಹಿಂದೆ ಬಿದ್ದು ಮನೋಕ್ಲೇಷೆಗಳನ್ನು ಗಳಿಸಿಕೊಂಡ ಆಧುನಿಕ ಜಗತ್ತಿನ ಸಂಸ್ಕೃತಿಗೂ ಇರುವ ವ್ಯತ್ಯಾಸ. ಇಂಥ ಪ್ರಕರಣಗಳು ನಮ್ಮಲ್ಲಿಲ್ಲ ಎಂದೇನಲ್ಲ. ಆದರೆ ಅವು ಈ ಮಟ್ಟಕ್ಕಂತೂ ಇಳಿದಿರುವುದಿಲ್ಲ. ತಾವು ಆರ್ಹ್ತಿಕವಾಗಿ ಸುಸ್ಥಿಯಲ್ಲಿದ್ದರೂ ಮಡದಿ ಏನೆಂದುಕೊಳ್ಳುತ್ತಾಳೋ ಎಂದು ಹೆದರಿ ತಮ್ಮ ತಾಯಂದಿರನ್ನು ತಮ್ಮೊಂದಿಗೆ ಇಟ್ಟುಕೊಳ್ಳದ ಮಹಾನುಭಾವರೂ ಇದ್ದಾರೆ. ವಿಧಿಯಿಲ್ಲದೇ ಇಂಥ ತಾಯಂದಿರು ಯಾರದಾದರೂ ಮನೆಯಲ್ಲಿ ಕೆಲಸಕ್ಕಿದ್ದು ಇರುವಷ್ಟು ಆಯಸ್ಸನ್ನು ಕಳೆಯುತ್ತಿದ್ದಾರೆ. ಸರಿ ನ್ಯಾಯಾಲಯ ಇವರೀರ್ವರ ವಾದ ಆಲಿಸಿ ಕೊಟ್ಟ ಮಹಾ ತೀರ್ಪು? ೩೬೦ ಯುರೋಗಳ ದಂಡ.
ಈ ಕೇಸನ್ನು ಕೋರ್ಟಿನ ಮುಂದೆ ತಂದು ಆಮೂಲ್ಯ ಸಮಯ ಹಾಳು ಮಾಡಿದ್ದಕ್ಕೂ, ತಾಯ್ತನಕ್ಕೆ ಚಿಕ್ಕಾಸಿನ ಬೆಲೆ ಕೊಡದ ಮಗನ ಸಂಸ್ಕೃತಿಗೂ ವಿಧಿಸಿದ ದಂಡ ಅಲ್ಲ. ಒಂದೇಸಮನೆ ಫೋನ್ ಮಾಡಿ ಮಗನ ನೆಮ್ಮದಿ ಕೆಡಿಸಿದ ತಾಯಿಗೆ ವಿಧಿಸಿತು ದಂಡ ನ್ಯಾಯಾಲಯ.
* ಮಾರ್ವಾಡಿ ಮತ್ತು ಅರಬ್
* ಮುಂದಿನ ಪಂದ್ಯ ಕ್ರಿಕೆಟ್ನ ಸ್ವರ್ಗ ಈಡನ್ ಗಾರ್ಡನ್ಸ್ ನಲ್ಲಿ
* ಫೇಸ್ ಬುಕ್ ಮುಸ್ಲಿಂ ವಿರೋಧಿ ?
ನಾಡಿನ ಪ್ರಸಿದ್ಧ ಪತ್ರಿಕೆಯೊಂದರಲ್ಲಿ ಬಂದ ಸುದ್ದಿ ಇದು. ಈಜಿಪ್ಟ್ ದೇಶದ ಮುಸ್ಲಿಂ ಧರ್ಮ ಗುರು ನೀಡಿದ “ಫತ್ವ” ವನ್ನು ತಪ್ಪಾಗಿ (ಉದ್ದೇಶಪೂರ್ವಕ?) ಅರ್ಥೈಸಿ ಬರೆದಾಗ ಮೇಲೆ ತೋರಿಸಿದ ತಲೆ ಬರಹ ಎಲ್ಲರ ಗಮನ ಸೆಳೆಯುತ್ತದೆ. ಮೈಸೂರು ಪ್ರಕಾಶನದ ಈ ಪತ್ರಿಕೆ ಸಾಧಾರಣವಾಗಿ ಯಾರಿಗೂ ನೋವಾಗದಂಥ, ಅನಾವಶ್ಯಕ ಕುತೂಹಲ ಕೆರಳಿಸದಂಥ ಸುದ್ದಿಗಳನ್ನು ಪ್ರಕಟಿಸುತ್ತದೆ. ಆದರೆ ಕೆಲವೊಮ್ಮೆ “ಫ್ಯಾಷೆನ್ ಟ್ರೆಂಡ್” ಅನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ನೋಡಿ. ಆದರೆ ಇಂಥ ವರದಿಗಳನ್ನು ಮುದ್ರಿಸಿ ಪತ್ರಿಕೆ ತನ್ನ ಆತ್ಮವನ್ನು ಕಳೆದುಕೊಳ್ಳಬಹುದು ಎನ್ನುವ ಸಾಮಾನ್ಯ ಜ್ಞಾನ ಸಂಪಾದಕನಿಗೆ ಇದ್ದರೆ ಆತ ಜಾಗರೂಕತೆ ತೋರಿಸುತ್ತಾನೆ.
ಈಜಿಪ್ಟ್ ದೇಶದ ಈ ಧರ್ಮ ಗುರು ಫೇಸ್ ಬುಕ್ ಮುಸ್ಲಿಂ ವಿರೋಧಿ ಅಂದ ಕೂಡಲೇ ನಾನಾಗಲಿ, ಲಕ್ಷಾಂತರ ಮುಸ್ಲಿಮರಾಗಲಿ ಫೇಸ್ ಬುಕ್ ನಿಂದ ಹೊರನಡೆಯುವಷ್ಟು ಬಾಲಿಶರಲ್ಲ. ಅಷ್ಟಕ್ಕೂ ಆ ಧರ್ಮ ಗುರು ನೀಡಿದ ವಿವರಣೆ ಸ್ವಲ್ಪ ನೋಡೋಣ. ಫೇಸ್ ಬುಕ್ ಮೂಲಕ ಅನೈತಿಕ ಸಂಬಂಧ ಅರಸಿ ವೈವಾಹಿಕ ಸಂಬಂಧವನ್ನು ಹಾಳುಗೆಡವುವರ ಬಗ್ಗೆ ಮಾತ್ರ ಈ ಎಚ್ಚರಿಕೆ. ಧರ್ಮ ಸಂದೇಶಗಳನ್ನೂ ಸಾರಲೂ, ವ್ಯಾವಹಾರಿಕವಾಗಿಯೋ, ಬರೀ ಸ್ನೇಹಕ್ಕಾಗಿಯೋ ಉಪಯೋಗಿಸುವವರ ವಿರುದ್ಧ ಅಲ್ಲ ಈ “ಫತ್ವ”.
ಇಸ್ಲಾಂ ಧರ್ಮದಲ್ಲಿ ಶೋಷಣೆಗೆ ಎಡೆ ಮಾಡುವ ಪುರೋಹಿತಶಾಹಿ ಇಲ್ಲ. ಹಾಗೂ ಫತ್ವ ಹೊರಡಿಸುವ ಅಧಿಕಾರ ಪ್ರತಿ ಮುಲ್ಲಾಗೂ ಇಲ್ಲ. ಪ್ರಪಂಚದ ಯಾವುದಾದರೂ ಮೂಲೆಯಲ್ಲಿ ಕೂತು ಯಾರಾದರೂ ತಮಗಿಷ್ಟ ಬಂದಂತೆ ಧರ್ಮದ ಬಗ್ಗೆ ಹೇಳಿಕೆ ನೀಡಿದ ಕೂಡಲೇ ಅದನ್ನು ವಿಶೇಷ ವರದಿಯನ್ನಾಗಿ ಪ್ರಕಟಿಸಿ ಬೊಬ್ಬೆ ಹೊಡೆಯುವ ಪತ್ರಿಕೆಗಳಿಗೆ ಮಾಡಲು ಬೇಕಷ್ಟು ಕೆಲಸಗಳಿವೆ. ಸಾಮಾಜಿಕ ಸಂಪರ್ಕ ಮಾಧ್ಯಮಗಳ ಸಂಕೀರ್ಣ ವ್ಯವಸ್ಥೆಗೆ ಬಳಿ ಬಿದ್ದು ತಮ್ಮ ವೈಯಕ್ತಿಕ ಜೀವನವನ್ನು ಹಾಳು ಮಾಡಿಕೊಂಡವರು ಹಲವರು. ವಿವಾಹಿತರಾಗಿಯೂ ಸಂಬಂಧಗಳನ್ನು ಹುಡುಕಿಕೊಂಡು ನಡೆಯುವ, ಸುಳ್ಳು ಪ್ರೊಫೈಲ್ ಗಳನ್ನು ನಂಬಿ ತಮ್ಮ ಬದುಕನ್ನು ಕೆಡಿಸಿ ಕೊಂಡವರೂ ಇದ್ದಾರೆ. ಟೀವೀ ಬಂದ ಹೊಸತರಲ್ಲೂ ಕೆಲವು ಧರ್ಮ ಗುರುಗಳು ಈ “ಶನಿ ಪೆಟ್ಟಿಗೆ” ಸಮಾಜವನ್ನು ಕಲುಷಿತಗೊಳಿಸಬಹುದು ಎಂದು ಎಚ್ಚರಿಸಿದ್ದರು. ಹಾಗೆ ಸಂಭವಿಸಿತೂ ಕೂಡಾ. ೮ – ೧೦ ವರ್ಷದ ಮಕ್ಕಳು ಅಶ್ಲೀಲ ಸೀರ್ಯಲ್ಲುಗಳನ್ನು, ಮೂವಿಗಳನ್ನು ನೋಡಿ ಪ್ರೇಮ ಪತ್ರ ಬರೆಯಲು ತೊಡಗಿದರು. ಹದಿಹರೆಯದ ಹೊತ್ತಿಗೆ ಎಲ್ಲ ರೀತಿಯ ಅನುಭವಗಳನ್ನು ಪಡೆಯಲು ತೊಡಗಿದರು. ಹಿಂಸಾಪ್ರಿಯರೂ ಆದರು.
ಹಾಗೆಂದು ತಂತ್ರ ಜ್ಞಾನಕ್ಕೆ ಬೆನ್ನು ತಿರುಗಿಸಿ ಬದುಕಬೇಕೆಂದಲ್ಲ. ಮಿತಿಯನ್ನು ಅರಿತು ಪ್ರಜ್ಞಾ ಶೀಲತೆ ಮೆರೆದರೆ ಅದೇ ಚೆಂದ.